Sidlaghatta : ರೈತರು ಹಾಗೂ ಸಾರ್ವಜನಿಕರು ಹೆಚ್ಚಾಗಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಕಂದಾಯ ಇಲಾಖೆಯಲ್ಲಿಯೇ ಪರಿಹಾರ ಕಂಡುಕೊಳ್ಳಬೇಕಾಗಿರುವುದರಿಂದ, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.
In English: MLA B N Ravikumar has directed revenue officials to speed up resolution of “podi” (land sub-division) cases pending for 30-50 years, inaugurating a new administrative hall at the taluk office on Friday. He said boundary disputes and record mismatches under the state’s “Podi Mukta” campaign should be cleared on priority so farmers stop having to make repeated rounds of government offices.
ನಗರದ ತಾಲ್ಲೂಕು ಕಚೇರಿಯ ಮೊದಲನೇ ಮಹಡಿಯಲ್ಲಿನ ನೂತನ ಸಭಾಂಗಣವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿಧಾನಸಭಾ ಕ್ಷೇತ್ರದಲ್ಲಿ ಜನಸಾಮಾನ್ಯರು ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳೇ ಹೆಚ್ಚಾಗಿವೆ. ಅದರಲ್ಲೂ ಕಳೆದ ಸುಮಾರು 30ರಿಂದ 50 ವರ್ಷಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ತಿ ಕಾರ್ಯ ರೈತರಿಗೆ ತೀವ್ರ ತೊಂದರೆಯಾಗಿದೆ ಎಂದು ಹೇಳಿದರು.
ಜಮೀನುಗಳ ಗಡಿ ಗುರುತಿಸುವಿಕೆ, ದಾಖಲೆಗಳಲ್ಲಿನ ವ್ಯತ್ಯಾಸ ಹಾಗೂ ಪೋಡಿ ಸಮಸ್ಯೆಗಳಿಂದ ರೈತರು ಕಚೇರಿಗಳಿಗೆ ಅಲೆದಾಡುವಂತಾಗಬಾರದು. ಈ ಸಮಸ್ಯೆಗಳನ್ನು ಪರಿಹರಿಸಲು ತಹಶೀಲ್ದಾರ್, ಎ.ಡಿ.ಎಲ್.ಆರ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಪೋಡಿ ಮುಕ್ತ” ಅಭಿಯಾನವು ರೈತರ ಬಹುಕಾಲದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಮಹತ್ವದ ಉಪಕ್ರಮವಾಗಿದೆ. ಈ ಕಾರ್ಯಕ್ರಮದ ಉದ್ದೇಶ ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಬಾಕಿ ಇರುವ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡಬೇಕು ಎಂದು ಹೇಳಿದರು.
ನೂತನ ಸಭಾಂಗಣವು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ, ಸಾರ್ವಜನಿಕ ಸಮಸ್ಯೆಗಳ ಚರ್ಚೆ ಹಾಗೂ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಮೂಲಸೌಕರ್ಯಗಳ ಜೊತೆಗೆ ಅಧಿಕಾರಿಗಳ ಕಾರ್ಯಕ್ಷಮತೆಯೂ ಮುಖ್ಯವಾಗಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಗಗನಸಿಂಧು ಮಾತನಾಡಿ, ಕಂದಾಯ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ತ್ವರಿತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಪೋಡಿ ಮುಕ್ತ ಅಭಿಯಾನ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಹಂತದ ಅಧಿಕಾರಿಗಳು ಸಹಕಾರದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗಗನಸಿಂಧು, ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್. ಸುಬ್ಬಾರೆಡ್ಡಿ, ಕ.ದ.ಸಂ.ಸ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್, ಐ.ಎನ್.ಟಿ.ಯು.ಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್. ಮುನೀಂದ್ರ, ಮುಗಿಲಡಿಪಿ ನಂಜಪ್ಪ ಹಾಗೂ ತಾಲ್ಲೂಕು ಕಚೇರಿ ಸಿಬ್ಬಂದಿ ಹಾಜರಿದ್ದರು.

