
Sidlaghatta : ಹೋರಾಟ ಹಾಗೂ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು, ಅಂತಹ ಹಕ್ಕನ್ನು ಬಲವಂತವಾಗಿ ಕಸಿದುಕೊಳ್ಳುವ ಜೊತೆಗೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ವಿನಾಕಾರಣ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಈ ಕೂಡಲೇ ಸೇವೆಯಿಂದ ಅಮಾನತ್ತು ಮಾಡಿ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್ ಒತ್ತಾಯಿಸಿದರು.
ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ರೈತರು ಕೆ.ಐ.ಎ.ಡಿ.ಬಿ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ವಿನಾಕಾರಣ ರೈತರ ಮೇಲೆ ಹಲ್ಲೆ ನಡೆಸಿದ ಪೊಲೀಸರ ಕ್ರಮ ಖಂಡಿಸಿ ರೈತ ಸಂಘದ ಪದಾಧಿಕಾರಿಗಳೊಂದಿಗೆ ನಗರದ ತಾಲ್ಲೂಕು ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.
ಕಳೆದ 45 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶಾಂತಿಯುತವಾಗಿ ಹೋರಾಟ ಮಾಡುತ್ತಾ ಬಂದಿರುವ ರೈತರ ಹಕ್ಕುಗಳನ್ನು ಕಸಿಯುವ ಯತ್ನದಲ್ಲಿ ಪೊಲೀಸರು ರೈತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ, ರೈತರೊಂದಿಗೆ ಅನುಚಿತವಾಗಿ ನಡೆದುಕೊಂಡಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕುಡಲೇ ಅಮಾನತ್ತುಗೊಳಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸುವ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಮದು ಎಚ್ಚರಿಸಿ ಗೃಹಸಚಿವರಿಗೆ ತಹಶೀಲ್ದಾರ್ ಎನ್.ಗಗನಸಿಂಧೂ ಅವರ ಮೂಲಕ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುನಿನಂಜಪ್ಪ, ಎನ್.ಬಸವರಾಜ್, ಬಿ.ನಾರಾಯಣಸ್ವಾಮಿ, ಜಿ.ಕೆಂಪಣ್ಣ, ದೇವರಾಜ್, ನಾಗರಾಜು, ಆರ್.ಮಂಜುನಾಥ, ಕೆ.ನಾರಾಯಣಸ್ವಾಮಿ, ಕಾರ್ತಿಕ್, ಸುಬ್ರಮಣಿ ಹಾಜರಿದ್ದರು.