Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ, ಸಮಾಜಕಾರ್ಯ ವಿಭಾಗದ ವತಿಯಿಂದ 7 ದಿನಗಳ ಗ್ರಾಮೀಣ ಕಲಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ಗ್ರಾಮ ಪಂಚಾಯತಿಯ ಹಳ್ಳಿಗಳಲ್ಲಿ 7 ದಿನಗಳ ಕಾಲ ಉಳಿಯಲಿದ್ದು, ಪ್ರಸ್ತುತ ಹಳ್ಳಿಗಳ ಜನರ ಜೀವನಶೈಲಿ, ಸಮಸ್ಯೆಗಳು ಮತ್ತು ಸಂಸ್ಕೃತಿಯನ್ನು ಪ್ರತ್ಯಕ್ಷವಾಗಿ ಕಂಡು, ನೈರ್ಮಲ್ಯ ಜಾಗೃತಿ, ಆರೋಗ್ಯ ತಪಾಸಣಾ ಶಿಬಿರಗಳು, ಮಕ್ಕಳ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಪ್ಪ ಮಾತನಾಡಿ, ತಲಕಾಯಲಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮಗಳು, ಯೋಜನೆಗಳು, ಅಭಿವೃದ್ಧಿ ಸೇರಿದಂತೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಬಗ್ಗೆ ವಿವರಿಸಿದರು. ಸ್ಥಳೀಯರು ಸಾರ್ವಜನಿಕರು ವಿದ್ಯಾರ್ಥಿಗಳಿಗೆ ಸಹಕಾರ ನೀಡಬೇಕು ಎಂದರು.
ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಮತ್ತು ಸ್ವಯಂಸೇವಾ ಸಂಸ್ಥೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಅಧ್ಯಯನ ಮಾಡಲಿದ್ದು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಸಂಘಟನಾ ಕೌಶಲ್ಯವನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗಲಿದೆ ಎಂದರು.
ಬೇರು-ಬೇವರು ಕಲಾ ತಂಡದವರು ಹಾಡಿನ ಮೂಲಕ ಗ್ರಾಮೀಣ ಬದುಕನ್ನು ತೆರೆದಿಟ್ಟರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ, ಸಮಾಜಕಾರ್ಯ ವಿಭಾಗದ ಸಂಯೋಜಕರಾದ ನರಸಿಂಹಪ್ಪ, ಬಸವಲಿಂಗಪ್ಪ ಮತ್ತು ಅಮೃತ, ಗ್ರಾಮ ಪಂಚಾಯಿತಿ ಕರವಸೂಲಿಗಾರ ಈಶ್ವರರೆಡ್ಡಿ, ಬೇರು-ಬೇವರು ಕಲಾ ತಂಡದವರು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಅಶ್ವತ್ಥರೆಡ್ಡಿ, ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.







