Sidlaghatta : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಡ್ಲಘಟ್ಟ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ನಗರ ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿ-ಯುವ ಕ್ರೀಡಾಪಟುಗಳು ಅಥ್ಲೆಟಿಕ್ಸ್, ಆಟೋಟ ಹಾಗೂ ಹಲವು ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಗೆಲುವು ಸಾಧಿಸಿದವರು ಬಹುಮಾನ ಪಡೆದುಕೊಂಡರು.
ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ದೇವೇಂದ್ರಪ್ಪ ಮಾತನಾಡಿ, ಈ ಬಾರಿ ನಮ್ಮ ಶಿಡ್ಲಘಟ್ಟದಲ್ಲಿ ಕ್ರೀಡಾಕೂಟ ಆಯೋಜನೆಯಾಗಿರುವುದು ಸಂತಸದ ಸಂಗತಿ. ಎಲ್ಲರೂ ಸಂಪೂರ್ಣವಾಗಿ ಕ್ರೀಡಾಸ್ಫೂರ್ತಿಯಿಂದ ತೊಡಗಿಸಿಕೊಂಡು ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ರಾಷ್ಟ್ರೀಯ ಕ್ರೀಡಾಪಟು ಜಯಂತಿ ಗ್ರಾಮ ನಾರಾಯಣಸ್ವಾಮಿ ಮಾತನಾಡಿ, ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಮೊದಲ ಬಾರಿಗೆ ಆನ್ ಲೈನ್ ನೋಂದಣಿ ಪ್ರಕ್ರಿಯೆಯನ್ನು ಜಾರಿಗೆ ತಂದಿದೆ. ಇದರಿಂದ ಕ್ರೀಡಾಪಟುಗಳಿಗೆ ನೇರ ಸೌಲಭ್ಯಗಳು ತಲುಪುವ ವ್ಯವಸ್ಥೆ ಮಾಡಲಾಗಿದೆ. ಓದಿನೊಂದಿಗೆ ಕ್ರೀಡೆಯೂ ಸಮಾನ ಮಹತ್ವದ್ದಾಗಿದೆ. ಶಿಡ್ಲಘಟ್ಟದ ಕ್ರೀಡಾಪಟುಗಳು ತಾಲ್ಲೂಕು ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲೂ ಕೀರ್ತಿ ತರಲಿ. ಹಿಂದಿನ ವರ್ಷ ಕ್ರೀಡಾ ಇಲಾಖೆಯಿಂದ ಟಿಎ-ಡಿಎ ಮತ್ತು ಸಾರಿಗೆ ಸೌಲಭ್ಯ ಸಿಗದ ಬಗ್ಗೆ ಕ್ರೀಡಾಪಟುಗಳು ಎದುರಿಸಿದ ಸಮಸ್ಯೆಯನ್ನು ವಿವರಿಸಿ, ಈ ಬಾರಿ ಅಧಿಕಾರಿಗಳು ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆಯೂ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ರವಿ, ಹಿರಿಯ ಕ್ರೀಡಾಪಟು ಗಂಗಾಧರ್, ದೈಹಿಕ ಶಿಕ್ಷಕರು , ಕ್ರೀಡಾಪಟುಗಳು, ಪೋಷಕರು ಹಾಗೂ ಕ್ರೀಡಾಭಿಮಾನಿಗಳು ಹಾಜರಿದ್ದರು.