Sidlaghatta, Chikkaballapur : ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ. ಜಿ. ಮುರಳಿ ಆನಂದ್ ಮಾತನಾಡಿ, ಕಾಲೇಜಿನಲ್ಲಿ ರಕ್ತದಾನ ಶಿಬಿರ ಆಯೋಜಿಸುವುದರ ಉದ್ದೇಶ ವಿದ್ಯಾರ್ಥಿಗಳಲ್ಲಿ ರಕ್ತದಾನದ ಕುರಿತು ಅರಿವು ಮೂಡಿಸುವುದು. ರಕ್ತದಾನದ ಮಹತ್ವ, ಅದರ ಪ್ರಯೋಜನಗಳು ಮತ್ತು ಅಗತ್ಯತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟ ಕಲ್ಪನೆ ನೀಡುವುದಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ರಕ್ತದಾನದ ಕುರಿತ ಜ್ಞಾನ, ಭಯ ನಿವಾರಣೆ, ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವುದಲ್ಲದೆ ರಕ್ತದ ಕೊರತೆ ನೀಗಿಸುವಲ್ಲಿ ನೆರವಾಗುವುದಾಗಿದೆ. ಭವಿಷ್ಯದ ನಾಗರಿಕರಲ್ಲಿ ಸಮಾಜಸೇವೆ, ಮಾನವೀಯತೆ ಮತ್ತು ವೈದ್ಯಕೀಯ ಅಗತ್ಯಗಳ ಬಗ್ಗೆ ಕಾಳಜಿಯನ್ನು ಬೆಳೆಸಲು ಈ ಶಿಬಿರ ನೆರವಾಗಿದೆ ಎಂದು ಹೇಳಿದರು.
ಶಿಬಿರದಲ್ಲಿ 40 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ರಕ್ತದಾನ ಶಿಬಿರದ ಸಂಘಟನಾ ಸಂಚಾಲಕ ಡಾ. ಷಫಿ ಅಹಮದ್, ಸಂಚಾಲಕಿ ಡಾ.ಸುನಿತಾ.ಎಂ., ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ, ಡಾ. ಎನ್. ವಿ. ಆದಿನಾರಾಯಣಪ್ಪ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾ ಉಪಾಧ್ಯಕ್ಷ ಮುನಿ ನಂಜಪ್ಪ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಸಾಮೂಹಿಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಕರವೇ ತಾಲ್ಲೂಕು ಅಧ್ಯಕ್ಷ ಸುನಿಲ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ತಾಲ್ಲೂಕು ಅಧ್ಯಕ್ಷ ರಾಮಾಂಜನೇಯ, ಎನ್.ಎಸ್.ಎಸ್ ಮತ್ತು ಭಾರತ್ ಸ್ಕೌಟ್ಸ್ ಗೈಡ್ಸ್ ಘಟದ ವಿದ್ಯಾರ್ಥಿಗಳು ಹಾಜರಿದ್ದರು.








