
Sidlaghatta : ದೇವಸ್ಥಾನದ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 18 ರಂದು ಚಿಕ್ಕದಾಸೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗ್ರಾಮದ ನಿವಾಸಿ ಶ್ರೀಮತಿ ಬೈರಮ್ಮ ಅವರು ಮಧ್ಯಾಹ್ನ 12 ಗಂಟೆಗೆ ಮನೆಗೆ ಬೀಗ ಹಾಕಿ, ಕೀಯನ್ನು ಮೆಟ್ಟಿಲಿನ ಕೆಳಗೆ ಇಟ್ಟು ದೇವಸ್ಥಾನಕ್ಕೆ ಹೋಗಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಗೆ ವಾಪಸ್ ಬಂದು ನೋಡಿದಾಗ, ಮನೆಯ ಬೀಗ ತೆಗೆದಿರುವುದು ಗಮನಕ್ಕೆ ಬಂದಿದೆ. ಮನೆಯ ಒಳಗಿನ ಬೀರುವಿನಲ್ಲಿದ್ದ ಸುಮಾರು 6.4 ಲಕ್ಷ ಮೌಲ್ಯದ 85 ಗ್ರಾಂ ಬಂಗಾರದ ಒಡವೆಗಳು ಕಳ್ಳತನವಾಗಿರುವುದು ತಿಳಿದುಬಂದಿದೆ.
ಈ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣವನ್ನು ಭೇದಿಸಲು ಪ್ರತ್ಯೇಕ ತಂಡವನ್ನು ರಚಿಸಿ, ಖಚಿತ ಮಾಹಿತಿಯ ಮೇರೆಗೆ ಅದೇ ಗ್ರಾಮದ ಮುನಿರಾಜು (42) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ಕಳುವಾಗಿದ್ದ 85 ಗ್ರಾಂ ತೂಕದ ಸಂಪೂರ್ಣ ಬಂಗಾರದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಶಲ್ ಚೌಕ್ಷೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗನ್ನಾಥ್ ರೈ, ಚಿಂತಾಮಣಿ ಉಪ-ವಿಭಾಗದ ಪ್ರಭಾರ ಡಿವೈಎಸ್ಪಿ ಪ್ರಕಾಶ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ, ಶಿಡ್ಲಘಟ್ಟ ವೃತ್ತದ ಸಿಪಿಐ ಆನಂದಕುಮಾರ್ ಜೆ.ಎನ್ ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಎಸ್ ಐ ಸುನೀಲ್ ಕುಮಾರ್, ಸಿಬ್ಬಂದಿ ಸಂದೀಪ್, ಮುರಳಿಕೃಷ್ಣ, ರವೀಂದ್ರ, ಆಂಜನೇಯ, ನಾಗರಾಜ, ಅಂಬರೀಷ್, ಮಂಜುನಾಥ ಮತ್ತು ಶ್ರೀಮತಿ ಲಕ್ಷ್ಮಿ ರವರ ತಂಡ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.