
Sidlaghatta : “ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇಡೀ ಸಮಾಜವನ್ನು ಒಗ್ಗೂಡಿಸಲು ಫೆಬ್ರವರಿ 1 ರಂದು ನಗರದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ಹಮ್ಮಿಕೊಳ್ಳಲಾಗಿದೆ,” ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ ತಿಳಿಸಿದರು.
ನಗರದ ಕೋಟೆ ವೃತ್ತದ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿ, ಕಾರ್ಯಕ್ರಮದ ಕರಪತ್ರಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
“ಈ ಸಮಾಜೋತ್ಸವವು ಯಾವುದೇ ಅನ್ಯ ಧರ್ಮಗಳ ವಿರುದ್ಧ ಮಾಡುವ ಶಕ್ತಿ ಪ್ರದರ್ಶನವಲ್ಲ. ಸಾವಿರಾರು ವರ್ಷಗಳ ಇತಿಹಾಸವಿರುವ ಭಾರತದಲ್ಲಿ ನಾವೆಲ್ಲರೂ ಸುಖ-ಶಾಂತಿಯಿಂದ ಬದುಕಬೇಕು. ಆದರೆ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆಯನ್ನು ಎದುರಿಸಲು ನಮ್ಮಲ್ಲಿ ಒಗ್ಗಟ್ಟು ಅಗತ್ಯ. ಆ ಉದ್ದೇಶದಿಂದಲೇ ಈ ಕಾರ್ಯಕ್ರಮ ರೂಪಿಸಲಾಗಿದೆ,” ಎಂದು ಅವರು ಸ್ಪಷ್ಟಪಡಿಸಿದರು.
ಫೆಬ್ರವರಿ 1 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಗರದ ಬಸ್ ನಿಲ್ದಾಣದಿಂದ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ಇದು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಕೋಟೆ ವೃತ್ತವನ್ನು ತಲುಪಲಿದೆ. ಮಧ್ಯಾಹ್ನ 2:30 ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕೋಲಾರ ಜಿಲ್ಲಾ ಸಂಘಚಾಲಕ ಗೋವಿಂದರಾಜ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಶ್ರೀನಿವಾಸ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ನರೇಶ್ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.