Sidlaghatta : ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ KIADB ಯು ಭೂಮಿ ಸ್ವಾಧೀನ ಮಾಡುವ ಕ್ರಮ ಹಾಗೂ ಏಪ್ರಿಲ್ 25ರಂದು ನಡೆದ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆಯ ಪಾರದರ್ಶಕತೆಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ ಹಸಿರು ಸೇನೆ ರೈತ ಸಂಘ, ಕೆಐಎಡಿಬಿ ಭೂ ವಿರೋಧಿ ಹೋರಾಟ ಸಮಿತಿ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, “ನಾವು ಕೈಗಾರಿಕಾ ಅಭಿವೃದ್ಧಿಗೆ ವಿರೋಧಿಗಳಲ್ಲ. ಆದರೆ ಫಲವತ್ತಾದ ಕೃಷಿ ಭೂಮಿಯನ್ನು ರೈತರ ವಿರೋಧದ ಹೊರತಾಗಿ ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಲ್ಲ” ಎಂದರು. ರೈತರ ಒಪ್ಪಿಗೆಯಿಲ್ಲದೆ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಯುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದರು.
ಅಭಿಪ್ರಾಯ ಸಂಗ್ರಹದ ವೇಳೆ ಬಿಳಿ ಮತ್ತು ಪಿಂಕ್ ಚೀಟಿ ಮೂಲಕ ರೈತರು ತಮ್ಮ ಅಭಿಪ್ರಾಯವನ್ನು ಸಲ್ಲಿಸಿದರೂ, ಎಣಿಕೆಯ ವೇಳೆ ರೈತರ ಪ್ರತಿನಿಧಿಗಳನ್ನು ಹೊರಗಿಟ್ಟು ಅಧಿಕಾರಿಗಳು ತಾವೇ ಅಂಕಿ-ಅಂಶಗಳನ್ನು ಪ್ರಕಟಿಸಿದ್ದು ಸಾರ್ವಜನಿಕ ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಅವರು ಆರೋಪಿಸಿದರು. “ಪ್ರಜಾಪ್ರಭುತ್ವದಲ್ಲಿ ಪಾರದರ್ಶಕತೆ ಅತ್ಯಗತ್ಯ. ಆದರೆ ಇಲ್ಲಿ ಪಕ್ಷಪಾತದ ಅನುಮಾನ ಮೂಡಿದೆ” ಎಂದರು.
“ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಲ್ಲ” ಎಂಬ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿದ ಅವರು, “ರೈತ ಸಂಘಟನೆಗಳ ನಾಯಕರು ರೈತರ ಕಷ್ಟಗಳಿಗೆ ಸ್ಪಂದಿಸಲು ಹಸಿರು ಶಾಲು ಧರಿಸುತ್ತಾರೆ. ಇಂತಹ ಮಾತುಗಳು ರೈತರ ಗೌರವಕ್ಕೆ ಧಕ್ಕೆಯಾಗಿದೆ” ಎಂದು ಹೇಳಿದ್ದಾರೆ.
ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ. ರಾಜಣ್ಣ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎನ್. ವೆಂಕಟೇಶ್ ಸೇರಿದಂತೆ ಹಲವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಕೆಐಎಡಿಬಿ ಭೂ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಹೀರೆಬಲ್ಲ ಕೃಷ್ಣಪ್ಪ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಸೀಕಲ್ ಆನಂದಗೌಡ, ನಗರ ಘಟಕದ ಅಧ್ಯಕ್ಷ ಬಿ. ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ವೀರಾಪುರ ಮುನಿನಂಜಪ್ಪ, ಅಜಿತ್ ಕುಮಾರ್ ಸೇರಿದಂತೆ ಹಲವಾರು ರೈತ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.