
Sidlaghatta : ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಮೊಹಮ್ಮದ್ ರೋಷನ್ ಷಾ ಮಾತನಾಡಿ , ಯೋಗವು ಕೇವಲ ವ್ಯಾಯಾಮವಲ್ಲ, ಅದು ಆರೋಗ್ಯಕರ ಮತ್ತು ಶಿಸ್ತುಬದ್ಧ ಜೀವನಶೈಲಿಯ ಒಂದು ಭಾಗವಾಗಿದೆ ಎಂದು ಹೇಳಿದರು.
ನಿಯಮಿತ ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ. ಇಂದಿನ ಒತ್ತಡದ ಜೀವನದಲ್ಲಿ ಯೋಗದ ಮಹತ್ವ ಇನ್ನಷ್ಟು ಹೆಚ್ಚಿದ್ದು, ಪ್ರತಿಯೊಬ್ಬರೂ ತಮ್ಮ ದಿನಚರಿಯಲ್ಲಿ ಯೋಗಕ್ಕೆ ಸ್ಥಾನ ನೀಡಬೇಕು ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಮಾತನಾಡಿ, ಯೋಗವು ಭಾರತದ ಪ್ರಾಚೀನ ಪರಂಪರೆಯ ಅಮೂಲ್ಯ ಕೊಡುಗೆಯಾಗಿದೆ. ಎಲ್ಲರೂ ಯೋಗಾಭ್ಯಾಸವನ್ನು ಜೀವನದ ಭಾಗವನ್ನಾಗಿಸಿಕೊಳ್ಳಬೇಕು ಎಂದರು.
ಯೋಗಗುರು ಶ್ರೀಕಾಂತ್ ಅವರ ಮಾರ್ಗದರ್ಶನದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು. ಯೋಗಾಭ್ಯಾಸದ ಮೂಲಕ ದೈಹಿಕ ಕ್ಷಮತೆ, ಏಕಾಗ್ರತೆ ಹಾಗೂ ಮಾನಸಿಕ ಸ್ಥಿರತೆ ವೃದ್ಧಿಯಾಗುತ್ತದೆ ಎಂಬುದರ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ.ಜಿ. ಭಾಸ್ಕರ್, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.