
ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಬ್ಯಾಟರಾಯಸ್ವಾಮಿ ದೇವಾಲಯದ ಮೆಟ್ಟಿಲುಗಳ ಮೇಲೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡಕ್ಕಾಗಿ ನಾವು – ಲಕ್ಷ ಕಂಠಗಳ ಗೀತಗಾಯನ ಅಂಗವಾಗಿ ಗುರುವಾರ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರು ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಹಾಡುಗಳನ್ನು ಹಾಡಿದರು.
ನಾಡ ಗೀತೆಯೊಂದಿಗೆ ಆರಂಭವಾದ ಗೀತ ಗಾಯನದಲ್ಲಿ ಕುವೆಂಪುರವರ “ಬಾರಿಸು ಕನ್ನಡ ಡಿಂಡಿಮವ”, ಡಾ.ಕೆ.ಎಸ್.ನಿಸ್ಸಾರ್ ಅಹಮದ್ ಅವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖರವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಗೀತೆಗಳನ್ನು ಹಾಡಲಾಯಿತು.
ತಾಲ್ಲೂಕು ಆಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ, ತಹಶೀಲ್ದಾರ್ ರಾಜೀವ್, ಇ.ಒ ಚಂದ್ರಕಾಂತ್, ನಗರಸಭೆ ಆಯುಕ್ತ ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ಸರ್ಕಾರಿ ನೌಕರ ಸಂಘದ ಅದ್ಯಕ್ಷ ಸುಬ್ಬಾರೆಡ್ಡಿ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎ.ಎಂ.ತ್ಯಾಗರಾಜ್, ಶಾಲಾಶಿಕ್ಷಕರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಡಿದರು.
“ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣವನ್ನು ತೊಟ್ಟರು. ಕನ್ನಡನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ ಎಂದು ಸಂಕಲ್ಪ ಮಾಡಿದರು.