Sidlaghatta : ತಾಲ್ಲೂಕು ಪಂಚಾಯಿತಿ ಸಭಾರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಸೋಮವಾರ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ನಡೆಯಿತು.
ತಹಶೀಲ್ದಾರ್ ಗಗನಸಿಂದು ಮಾತನಾಡಿ, ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಪ್ರತಿವರ್ಷದಂತೆ ಅರ್ಥಪೂರ್ಣವಾಗಿ ಆಚರಿಸೋಣ. ಕೆಂಪೇಗೌಡರ ಕೊಡುಗೆಗಳು ಜಗತ್ತಿಗೆ ಮಾದರಿಯಾಗಿವೆ. ಹಾಗಾಗಿ ಅವರ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ತಾಲ್ಲೂಕಿನ ಎಲ್ಲಾ ಸಮುದಾಯಗಳ, ಸಂಘಟನೆಗಳ ಮುಖಂಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸೋಣ. ಒಳಂಗಣ ಕಾರ್ಯಕ್ರಮವನ್ನು ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುವುದು ಎಂದರು.
ಕೆಂಪೇಗೌಡ ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಎಲ್ಲಾ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ ಮಹಾನಿಯರು. ಅವರ ಜಯಂತಿಯನ್ನು ಪಕ್ಷಾತೀತವಾಗಿ ಎಲ್ಲಾ ಸಮುದಾಯಗಳೊಂದಿಗೆ ಆಚರಿಸೋಣ. ಸಂಘದ ವತಿಯಿಂದ 100 ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದರು.
ಒಕ್ಕಲಿಗರ ಯುವಕ ಸಂಘದ ಅಧ್ಯಕ್ಷ ಜೆ.ವಿ.ವೆಂಕಟಸ್ವಾಮಿ ಮಾತನಾಡಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪಕ್ಷಾತೀತವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು. ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳು, ಗ್ರಾಮಗಳಿಂದ ನಾಡಪ್ರಭು ಕೆಂಪೇಗೌಡರ ಸ್ಥಬ್ದ ಚಿತ್ರಗಳ ಅಲಂಕೃತ ಟ್ರಾಕ್ಟರ್ ಗಳು, ಸಾವಿರಾರು ಮಂದಿ ಭಾಗವಹಿಸಿ ಅದ್ದೂರಿ ಮೆರವಣಿಗೆ ನಡೆಯುತ್ತದೆ ಎಂದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ಜೂನ್ 27 ರ ಶನಿವಾರ ಬೆಳಿಗ್ಗೆ 9.30 ಕ್ಕೆ ಚಿಂತಾಮಣಿ ರಸ್ತೆ ಬದಿಯಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು, ನಂತರ 10ಕ್ಕೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವೇದಿಕೆ ಕಾರ್ಯಕ್ರಮದಲ್ಲಿ ಗಣ್ಯರ ಭಾಷಣ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ನಂತರ 11ಕ್ಕೆ ಅದ್ದೂರಿ ಮೆರವಣಿಗೆಗೆ ಗಣ್ಯರು ಚಾಲನೆ ನೀಡಲಿದ್ದಾರೆ. ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ಎಲ್ಲಾ ಸರ್ಕಾರಿ ನೌಕರು ಕಡ್ಡಾಯವಾಗಿ ಭಾಗವಹಿಸುವಂತೆ ಕೋರಿದರು.
ನಗರಸಭೆ ವತಿಯಿಂದ ರಸ್ತೆಯ ಸ್ವಚ್ಛತೆ ಹಾಗು ಮೆರವಣಿಗೆ ಸಾಗುವ ದಾರಿಯಲ್ಲಿ ಯಾವುದೇ ಅಡೆತಡೆ ಇಲ್ಲದಂತೆ ಜಾಗೃತಿ ವಹಿಸಬೇಕು ಎಂದರು. ಪೋಲೀಸ್ ಅಧಿಕಾರಿಗಳು ಮೆರವಣಿಗೆಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದೆಂದರು.
ಸಭೆಯಲ್ಲಿ ತಾಲ್ಲೂಕು ಒಕ್ಕಲಿಗರ ಯುವಸೇನೆ ಸಂಘದ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ತಾಲ್ಲೂಕು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಪಿ.ಎಸ್.ಐ ವೇಣುಗೋಪಾಲ, ಹಾಗು ಸಮುದಾಯದ ಮುಖಂಡರು ಭಾಗವಹಿಸಿದ್ದರು.








