![01MAY24SD02d Sidlaghatta Melur Dharmarayaswamy Draupadamma Karaga](https://www.sidlaghatta.com/wp-content/uploads/2024/05/01MAY24SD02d.jpg)
Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಧರ್ಮರಾಯಸ್ವಾಮಿ ದ್ರೌಪತಮ್ಮನವರ 36ನೇ ವರ್ಷದ ಹೂವಿನ ಕರಗವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಕರಗದ ಪ್ರಯುಕ್ತ ಆರ್ಕೆಸ್ಟ್ರಾ, ವಾಲಗ, ತಮಟೆ ಮತ್ತು ವಾದ್ಯಗೋಷ್ಟಿಯನ್ನು ಆಯೋಜಿಸಲಾಗಿತ್ತು. ಸಿದ್ಧಣ್ಣನವರ ಮಗ ಎಂ.ಎಸ್.ಅಭಿಲಾಷ್ ರಾತ್ರಿಯಿಡೀ ಕರಗವನ್ನು ಹೊತ್ತು ತಮಟೆಯ ವಾದನದೊಂದಿಗೆ ಊರೆಲ್ಲಾ ಸುತ್ತಿದಾಗ ದಾರಿಯುದ್ದಕ್ಕೂ ಮಲ್ಲಿಗೆ ಹೂಗಳನ್ನು ಅರ್ಪಿಸಿ, ಆರತಿ ಬೆಳಗುತ್ತಿದ್ದರು. ಕೆಲವೆಡೆ ಕರಗದ ಆಗಮನಕ್ಕಾಗಿ ರಸ್ತೆಯ ಮೇಲೆಲ್ಲಾ ರಂಗವಲ್ಲಿಯನ್ನು ಬಿಡಿಸಲಾಗಿತ್ತು.
ಪರಿಮಳಯುಕ್ತ ಮಲ್ಲಿಗೆ ಹೂವಿಂದ ಅಲಂಕರಿಸಲಾದ ಕರಗವು ಸುವಾಸನೆ ಬೀರುತ್ತಾ ಅಲೌಕಿಕವಾದ ಸನ್ನಿವೇಶವನ್ನು ಸೃಷ್ಟಿಸಿತ್ತು. ಹೂವಿನ ಕರಗಕ್ಕೂ ಮೊದಲು ಅನೇಕ ಧಾರ್ಮಿಕ ವಿಧಿ ವಿಧಾನಗಳು ಕರಗದ ಕುಂಟೆ ಹಾಗೂ ಶಕ್ತಿ ಪೀಠಗಳಲ್ಲಿ ನಡೆಯಿತು. ವೀರಕುಮಾರರು, ಗೌಡರು, ಗಣಾಚಾರಿ, ಘಂಟೆಪೂಜಾರರು ಹಾಗೂ ಚಾಕರಿದಾರರು ಶಕ್ತಿಪೀಠದಲ್ಲಿ ಕರಗಕರ್ತ ಪೂಜಾರಿಯನ್ನು ಕರಗ ಧರಿಸುವುದಕ್ಕೆ ಧಾರ್ಮಿಕ ಸಂಪ್ರದಾಯಗಳನ್ನು ಅಣಿಗೊಳಿಸಿದರು.
ದ್ರೌಪತಮ್ಮನವರಿಗೆ ಕಲ್ಯಾಣೋತ್ಸವ, ಬಳೆ ತೊಡಿಸುವ ಶಾಸ್ತ್ರ, ಹಾಲು ಬಣ್ಣದ ಸುವಾಸನೆ ಬೀರುವ ಸುಂದರ ಹೂ ಮಲ್ಲಿಗೆ ಕರಗ ಕಳಸವೂ ಸೇರಿದಂತೆ ಎಲ್ಲೆಡೆ ಭಕ್ತಿ ಭಾವವನ್ನು ಸೃಜಿಸಿತ್ತು. ವೀರಕುಮಾರರ ಹಾರಗಳಿಂದ ಹಿಡಿದು ಕರಗದ ಎಲ್ಲಾ ಉತ್ಸವಗಳಲ್ಲೂ ಮಲ್ಲಿಗೆ ಹೂಗಳಿಗೆ ಮೊದಲ ಆದ್ಯತೆ ನೀಡಲಾಗಿತ್ತು.
ಗ್ರಾಮದ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಶಾಸ್ತ್ರೋಕ್ತವಾಗಿ ಜರುಗಿಸಲಾಯಿತು.
ಶಾಸಕ ಬಿ.ಎನ್.ರವಿಕುಮಾರ್, ವಹ್ನೀಕುಲ ಕ್ಷತ್ರಿಯರ ಟ್ರಸ್ಟ್ ಸದಸ್ಯರು, ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು.