
Sidlaghatta : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಬಗೆಹರಿಸುವುದರ ಬದಲಿಗೆ ಸಮಸ್ಯೆಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿರ್ಮಲಾ ಅವರು ಅಧಿಕಾರಿಗಳಿಗೆ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಂಗಮಕೋಟೆ ಹೋಬಳಿಯಲ್ಲಿನ ಕುಡಿಯುವ ನೀರು, ರಾಸುಗಳಿಗೆ ಮೇವಿನ ಲಭ್ಯತೆ ಹಾಗೂ ಕೃಷಿ ಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೀಗ ಬೇಸಿಗೆಯ ಬಿಸಿಲ ದಿನಗಳು. ಕೇವಲ ಜನ ಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಮಾತ್ರ ಎದುರಾಗುವುದಿಲ್ಲ. ಬದಲಿಗೆ ರಾಸುಗಳಿಗೆ ಮೇವಿನ ಕೊರತೆಯೂ ಎದುರಾಗಬಹುದು. ಅದರಿಂದ ಬೇರೆ ಬೇರೆ ರೂಪದ ನಾನಾ ಸಮಸ್ಯೆಗಳು ಎದುರಾಗಲಿವೆ ಎಂದರು.
ಆದ್ದರಿಂದ ಸಂಬಂಧಿಸಿದ ನೋಡಲ್ ಅಧಿಕಾರಿಗಳು ಕುಡಿಯುವ ನೀರು ಹಾಗೂ ರಾಸುಗಳಿಗೆ ಮೇವಿನ ಕೊರತೆಯೂ ಆಗದಂತೆ ಮುಂಜಾಗ್ರತೆಯ ಕ್ರಮಗಳನ್ನು ವಹಿಸಬೇಕು. ಜತೆಗೆ ಕೃಷಿ ಚಟುವಟಿಕೆಗಳನ್ನು ಕೂಡ ಗಮನಿಸಬೇಕು ಎಂದು ಹೇಳಿದರು.
ಎಲ್ಲೋ ಕುಳಿತು ವರದಿ ನೀಡುವುದರಿಂದ ಸಮಸ್ಯೆ ಇನ್ನಷ್ಟು ಬಿಗಡಾಯಿಸುತ್ತದೆ. ಹಾಗಾಗಿ ಸ್ಥಳ ಭೇಟಿ ಪರಿಶೀಲನೆಯಿಂದ ಮಾತ್ರ ಸಮಸ್ಯೆಯ ವಾಸ್ತವ ಸ್ಥಿತಿ ತಿಳಿಯಲಿದೆಯಲ್ಲದೆ ಅದರ ಪರಿಹಾರವೂ ಸಾಧ್ಯವಾಗಲಿದೆ ಎಂದು ತಿಳಿಸಿ ಕಾಲ ಕಾಲಕ್ಕೆ ಸಮಸ್ಯೆಯ ವರದಿ ಮತ್ತು ಅದರ ಪರಿಹಾರಕ್ಕೆ ಕೈಗೊಂಡ ಕ್ರಮಗಳ ವರದಿಯನ್ನು ನೀಡುವಂತೆ ತಾಕೀತು ಮಾಡಿದರು.
ಜಂಗಮಕೋಟೆ ಹೋಬಳಿಗೆ ನೇಮಕ ಮಾಡಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಮತ್ತು ನೋಡಲ್ ಅಧಿಕಾರಿಗಳು ಸಂಬಂಧಿಸಿದ ಹೋಬಳಿಗೆ ವಾರಕ್ಕೆ ಕನಿಷ್ಠ ಒಂದು ದಿನ ಖುದ್ದಾಗಿ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ಮಾಡಬೇಕು.
ಜತೆಗೆ ತಾವು ಭೇಟಿ ನೀಡಿದ ಪರಿಶೀಲನಾ ಅವಧಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ತಾಲ್ಲೂಕಿನ ಟಾಸ್ಕ್ ಫೋರ್ಸ್ ಸಮಿತಿಗೆ ಮಾಹಿತಿಯನ್ನು ನೀಡಿ ಸಮನ್ವಯ ಸಾಧಿಸಿ ಆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ತಿಳಿಸಿದರು.
ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸ್ಥಳೀಯ ಸಂಸ್ಥೆಗಳು ಖಾಸಗಿ ಕೊಳವೆಬಾವಿ ಮತ್ತು ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಬೇಕು.
ಕೊಳವೆ ಬಾವಿಗಳು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಬೇಕು.ಒಂದೊಮ್ಮೆ ದುರಸ್ತಿಯಾಗಿದ್ದರೆ ಅದರ ರಿಪೇರಿ ಹಾಗೂ ಇನ್ನಿತರೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ಹಾಗೂ ನೀರಿನ ಗುಣಮಟ್ಟವನ್ನು ಪರಿಶೀಲನೆ ಮಾಡಿ ಕುಡಿಯುವ ನೀರು ಶುದ್ಧವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು ಬಹಳ ಮುಖ್ಯ ಎಂದರು.
ರಾಸುಗಳ ಮೇವಿನ ಸ್ಥಿತಿಗತಿಯ ಬಗ್ಗೆ ಪರಿಶೀಲಿಸಿ ಮೇವಿನ ಕೊರತೆ ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಿ ಅವರ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಜಂಗಮಕೋಟೆ ಹೋಬಳಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು, ಜಂಗಮಕೋಟೆ ಹೋಬಳಿಯ ನೋಡಲ್ ಅಧಿಕಾರಿಗಳು, ತಾಲ್ಲೂಕು ಪಂಚಾಯಹಿತಿ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.