Sidlaghatta : ಶಾಂತಿ ಸೌಹಾರ್ದತೆ ಮತ್ತು ಭ್ರಾತೃತ್ವವದ ಸಂದೇಶವನ್ನು ಸಾರುವ ಈದ್ ಉಲ್ ಫಿತರ್ (ರಂಜಾನ್) ಹಬ್ಬವನ್ನು ಸಹಸ್ರಾರು ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಶನಿವಾರ ಆಚರಿಸಿದರು.
ಕಳೆದ ಒಂದು ತಿಂಗಳಿಂದ ಉಪವಾಸ ವ್ರತವನ್ನು ಆಚರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಅಲ್ಲಾಹನ ಕೃಪೆಗೆ ಪಾತ್ರರಾದ ಮುಸ್ಲೀಮರು ಶನಿವಾರ ನಗರದ ಜಾಮಿಯಾ ಮಸೀದಿಯಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೊರವಲಯದ ಮೀಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ನಿಧನ ಹೊಂದಿರುವ ಪೂರ್ವಜರ ಸಮಾಧಿಗಳ ಬಳಿ ಪ್ರಾರ್ಥನೆ ಸಲ್ಲಿಸಿದರು.
ಬಡವರಿಗೆ ದಾನ : ರಂಜಾನ್ ಹಬ್ಬಕ್ಕೂ ಒಂದು ತಿಂಗಳು ಮುನ್ನ ಅವರು ಕೈಗೊಳ್ಳುವ ರೋಜಾ ಆಚರಣೆಯಲ್ಲಿ ಹಿರಿಯರು ಮತ್ತು ಕಿರಿಯರು ಬೇಧವಿಲ್ಲದೆ ಪಾಲ್ಗೊಂಡಿದ್ದರು. ಪವಿತ್ರ ರಂಜಾನ್ ಮಾಸವನ್ನು ಧಾರ್ಮಿಕ ತಿಂಗಳು. ಉಪವಾಸದ ತಿಂಗಳೆಂದೇ ಕರೆಯುತ್ತಾರೆ. ತಿಂಗಳು ಪೂರ್ತಿ ಕುರಾನ್ ಪಠಿಸುತ್ತಾರೆ. ಎಲ್ಲರ ಸುಖ-ಸಂತೋಷ- ನೆಮ್ಮದಿಗಾಗಿ ಅಲ್ಲಾಹುವಿನಲ್ಲಿ ಬಿನ್ನವಿಸಿಕೊಳ್ಳುತ್ತಾರೆ. ಬಡವರಿಗೆ ಮತ್ತು ಸಂಕಷ್ಟದಲ್ಲಿದ್ದವರಿಗೆ ನೆರವು ನೀಡುತ್ತಾರೆ. ದಾನ ಮಾಡುತ್ತಾರೆ. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಪೂರ್ವಜರ ಸಮಾಧಿಗಳಿಗೆ ಪೂಜೆ ಸಲ್ಲಿಸಿದ ನಂತರ ಜಾತಿ ಬೇಧವಿಲ್ಲದೆ ಬಡವರಿಗೆ ದಾನ ನೀಡಿದರು.
ಜಮಾ ಮಸೀದಿಯ ಧರ್ಮಗುರುಗಳು ರಂಜಾನ್ ಹಬ್ಬದ ಮಹತ್ವದ ಕುರಿತು ಉಪದೇಶ ನೀಡಿ ಇಸ್ಲಾಂ ಧರ್ಮವು ಶಾಂತಿ ಸಂದೇಶವನ್ನು ಸಾರುತ್ತದೆ ಮುಸ್ಲಿಮರು ಸಹ ಜಾತಿ ಧರ್ಮ ಮರೆತು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜೀವನ ಆದರ್ಶಗಳನ್ನು ಜೀವನದಲ್ಲಿ ನಡೆಸಿಕೊಂಡು ಕಷ್ಟ ಸುಖಗಳಲ್ಲಿ ಸ್ಪಂದಿಸಿ ಕಾರ್ಯನಿರ್ವಹಿಸುವ ಮೂಲಕ ಸೌಹಾರ್ದತೆಯ ವಾತಾವರಣವನ್ನು ಮುಂದುವರಿಸಬೇಕೆಂದು ಕರೆ ನೀಡಿದರು.
ಈದ್ಗಾ ಮೈದಾನಕ್ಕೆ ಆಗಮಿಸಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ಕೋರಿದ ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, “ಶಿಡ್ಲಘಟ್ಟ ಕ್ಷೇತ್ರದಲ್ಲಿನ ಮುಸ್ಲಿಂ ಬಾಂಧವರ ಪರವಾಗಿ ಸದನದಲ್ಲಿ ಮಾತನಾಡುವ ಅವಕಾಶ ಸಿಕ್ಕಿತ್ತು. ಇಲ್ಲಿನ ಈದ್ಗಾ ಮೈದಾನದ ಅಭಿವೃದ್ಧಿಗಾಗಿ ಸಕಾರವನ್ನು ವಿಶೇಷ ಅನುದಾನ ನೀಡುವಂತೆ ಕೋರಿದ್ದೆ. 12 ಕೋಟಿ ರೂ ಅನುದಾನದ ಭರವಸೆ ಸಿಕ್ಕಿದೆ” ಎಂದು ಹೇಳಿದರು.
ತಹಶೀಲ್ದಾರ್ ಗಗನಸಿಂಧು, ಚೀಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ಮನೋಹರ್, ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.








