
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾದಲಮ್ಮ ಕಲ್ಯಾಣಿ ಸ್ವಚ್ಛತಾ ಆಂದೋಲನವನ್ನು ತಾಲ್ಲೂಕು ಪಂಚಾಯಿತಿ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಕಲ್ಯಾಣಿ ಸ್ವಚ್ಛತಾ ಆಂದೋಲನದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರೂ ಸಹ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ಕಲ್ಯಾಣಿಗಳಲ್ಲಿ ನೀರು ನಿಂತು ಮಲಿನವಾದರೆ ಸೊಳ್ಳೆಗಳ ಉತ್ಪತ್ತಿಯಾಗಿ ಡೆಂಗ್ಯೂ, ಮಲೇರಿಯಾ ಮತ್ತು ಚಿಕನ್ ಗುನ್ಯಾದಂತಹ ರೋಗಗಳು ಹರಡುತ್ತವೆ. ಆದ್ದರಿಂದ ನೀರು ಕಲುಷಿತವಾಗದಂತೆ ನೋಡಿಕೊಳ್ಳುವುದು ಅಗತ್ಯ. ಕಲ್ಯಾಣಿಗಳು ನಮ್ಮ ಸಾಂಪ್ರದಾಯಿಕ ಜಲಮೂಲಗಳಾಗಿವೆ. ಇವುಗಳನ್ನು ಸ್ವಚ್ಛವಾಗಿರಿಸುವುದರಿಂದ ಅಂತರ್ಜಲ ಮಟ್ಟ ವೃದ್ಧಿಸುವುದಲ್ಲದೆ, ಶುದ್ಧ ನೀರಿನ ಲಭ್ಯತೆ ಹೆಚ್ಚಾಗುತ್ತದೆ. ಕಲ್ಯಾಣಿಯ ಸುತ್ತಮುತ್ತ ಪ್ಲಾಸ್ಟಿಕ್, ಪೂಜಾ ಸಾಮಗ್ರಿ ಅಥವಾ ಇತರ ತ್ಯಾಜ್ಯಗಳನ್ನು ಎಸೆಯಬಾರದು. ಇದು ಕೇವಲ ಧಾರ್ಮಿಕ ಸ್ಥಳವಲ್ಲ, ನಮ್ಮ ಆರೋಗ್ಯದ ದೃಷ್ಟಿಯಿಂದಲೂ ಮುಖ್ಯವಾದುದು ಎಂದು ಜನರಿಗೆ ಮನವರಿಕೆ ಮಾಡಿಕೊಟ್ಟರು.
ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಯೋಜನಾ ಅಧಿಕಾರಿ ಅನಿಲ್ ಕುಮಾರ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಸಾದಲಿ ವೈದ್ಯ ಡಾ. ಯಶವಂತ್, ಸಾದಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಜ್ರೇಶ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.