Sidlaghatta : ಸುಪ್ರೀಂ ಕೋರ್ಟ್ ಮತ್ತು ರಾಜ್ಯ ಹೈಕೋರ್ಟ್ ನಿರ್ದೇಶನದ ಮೇರೆಗೆ, ಮುಂಬರುವ ಆಗಸ್ಟ್ 21ರಿಂದ 23ರವರೆಗೆ ಮೂರು ದಿನಗಳ ಕಾಲ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಶಿಡ್ಲಘಟ್ಟ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಾಧೀಶರು, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಒಪ್ಪಂದ ಮತ್ತು ಮಧ್ಯಸ್ಥಿಕೆ ಮೂಲಕ ಉಚಿತವಾಗಿ ಬಗೆಹರಿಸುವುದು ಈ ಅದಾಲತ್ನ ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು. ಶಿಡ್ಲಘಟ್ಟದ ನ್ಯಾಯಾಲಯದ ಆವರಣದಲ್ಲಿರುವ ಮಧ್ಯಸ್ಥಿಕೆ ಕೇಂದ್ರದಲ್ಲಿ ಈ ವಿಶೇಷ ಅದಾಲತ್ ನಡೆಯಲಿದ್ದು, ಸುಪ್ರೀಂ ಕೋರ್ಟ್ನಲ್ಲಿ ಅಪೀಲು ಮಾಡಿರುವ ಪ್ರಕರಣಗಳ ಕಕ್ಷಿದಾರರು ಇದರಲ್ಲಿ ಭಾಗವಹಿಸಬಹುದಾಗಿದೆ.
2003ರಲ್ಲಿ ಶಿಡ್ಲಘಟ್ಟ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಪ್ರಸ್ತುತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಪ್ರಕರಣಗಳಿಗೆ ಸಂಬಂಧಿಸಿದ ಕಕ್ಷಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಅವರು ಅದಾಲತ್ನಲ್ಲಿ ಭಾಗವಹಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಆಸಕ್ತಿ ತೋರಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಇದರೊಂದಿಗೆ ಸುಪ್ರೀಂ ಕೋರ್ಟ್ನಲ್ಲಿ ತಮ್ಮ ಪ್ರಕರಣಗಳು ಬಾಕಿ ಇದ್ದು, ಅಪೀಲು ಸಲ್ಲಿಸಿರುವ ಇತರ ಕಕ್ಷಿದಾರರು, ವಕೀಲರು ಮತ್ತು ಸಾರ್ವಜನಿಕರು ಈ ‘ಸಮಾಧಾನ ಸಮಾರೋಹ-2026’ರ ಸದುಪಯೋಗ ಪಡೆದುಕೊಳ್ಳಬೇಕೆಂದು ನ್ಯಾಯಾಧೀಶರು ಮನವಿ ಮಾಡಿದರು.








