
Sidlaghatta : ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬಂದಾಗ ಪ್ರಜ್ಞಾವಂತರಾದ ನಾವೆಲ್ಲರೂ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಲು ಮುಂದಾಗಬೇಕು ಎಂದು ಕೆಪಿಸಿಸಿ ಸಂಯೋಜಕ, ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜೀವ್ಗೌಡ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಭವನದಿಂದ ತಾಲ್ಲೂಕು ಕಚೇರಿಯವರೆಗೂ ನಡೆದ “ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ” ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರದಲ್ಲಿ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೂ ಧಕ್ಕೆ ಬರುವಂತಾಗಿದೆ. ಇದರಿಂದ ಅಂಬೇಡ್ಕರ್ ಅವರು ಕಂಡಿದ್ದ ಕನಸು, ಸಂವಿಧಾನದ ಆಶಯಗಳು ಈಡೇರದಂತಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಕೂಡ ಹಳ್ಳ ಹಿಡಿಯುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬಿಜೆಪಿಯು ತನಗೆ ಅನುಕೂಲ ಆಗುವಂತೆ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ದೇಶಾದ್ಯಂತ ಅಕ್ರಮವಾಗಿ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಿ ಅಕ್ರಮವಾಗಿ ಗೆಲುವು ಸಾಧಿಸಿ ಅಧಿಕಾರ ಹಿಡಿದಿದೆ. ಇದನ್ನು ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಪ್ರಶ್ನಿಸಿದ್ದಾರೆ.
ಅಷ್ಟೇ ಅಲ್ಲ ದೇಶದ ಉದ್ದಗಲಕ್ಕೂ ಹೋರಾಟ ನಡೆಸಲು ತೀರ್ಮಾನಿಸಿದ್ದು ಕರ್ನಾಟಕದಿಂದಲೆ ಆ ಹೋರಾಟದ ಕಹಳೆ ಊದಿದ್ದಾರೆ. ನಾವೆಲ್ಲರೂ ಕಳ್ಳ ಮತದಾರರ ಪಟ್ಟಿ ಬಗ್ಗೆ ಸಾರ್ವಜನಿಕರಲ್ಲಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಅರಿವು ಮೂಡಿಸಿ ಹೋರಾಟಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಉದಯ ಕುಮಾರ್ ಮಾತನಾಡಿ, ಅಕ್ರಮ ಮತದಾರರ ಪಟ್ಟಿ ತಯಾರಿಸಿ ಅಕ್ರಮವಾಗಿ ಬಿಜೆಪಿ ಅವರು ಅಧಿಕಾರಕ್ಕೆ ಬಂದಿದ್ದು ಈ ಬಗ್ಗೆ ನಾವು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಬೇಕಿದೆ. ಇದು ಬಿಜೆಪಿಯ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಯಾಗಿದೆ ಎಂದು ದೂರಿದರು.
ರಾಹುಲ್ ಗಾಂಧಿ ಅವರು ಕರೆ ಕೊಟ್ಟಿರುವಂತೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಈ ದಿನ ಸಂವಿಧಾನ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದು ಎಲ್ಲ ದೇಶ ಪ್ರೇಮಿ, ಪ್ರಜಾಪ್ರಭುತ್ವ ಪ್ರೇಮಿ ಹಾಗೂ ಸಂವಿಧಾನ ಪ್ರೇಮಿಗಳು ಭಾಗವಹಿಸಲಿದ್ದೇವೆ ಎಂದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಯಾಸ್ಮೀನ್ ತಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾರಾಜೀವ್ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಾಲ್ಫಿನ್ ನಾಗರಾಜ್, ಮುಖಂಡ ಟಿ.ಕೆ.ನಟರಾಜ್, ನಗರಸಭೆ ಸದಸ್ಯ ಅಫ್ಸರ್ಪಾಷ, ವಕೀಲ ಮುನಿರಾಜು, ಕುಂದಲಗುರ್ಕಿ ಮುನೀಂದ್ರ, ದೊಡ್ಡತೇಕಹಳ್ಳಿ ಗೋಪಾಲರೆಡ್ಡಿ, ಶ್ರೀನಾಥ್, ರಾಮಾಂಜಿನಪ್ಪ ಹಾಜರಿದ್ದರು.