
Sidlaghatta : ಶಿಡ್ಲಘಟ್ಟ ನಗರದ ಚಿಂತಾಮಣಿ ರಸ್ತೆಯಲ್ಲಿರುವ ಶ್ರೀವೀರಾಂಜನೇಯ ದೇವಾಲಯದ ಮುಂಭಾಗದಲ್ಲಿ ಶುಕ್ರವಾರ ಶ್ರೀರಾಮನವಮಿಯ ಪ್ರಯುಕ್ತ 96ನೇ ವರ್ಷದ ಉಟ್ಲು ಪರಿಷೆ ನಡೆಯಿತು. ಕ್ಷೀರ ಉಟ್ಲು ಮತ್ತು ಮನರಂಜನಾ ಉಟ್ಲು ನಡೆಯಿತು. ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗೇಟ್ ಬಳಿ ಇರುವ ಶ್ರೀ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ಮತ್ತು ಭಕ್ತರಹಳ್ಳಿಯಲ್ಲಿ ಸಹ ಉಟ್ಲು ಪರಿಷೆ ನಡೆಯಿತು.
96 ನೇ ವರ್ಷದ ಉಟ್ಲು ಪರಿಷೆ :
ಚಿಂತಾಮಣಿ ರಸ್ತೆಯಲ್ಲಿರುವ ಶ್ರೀವೀರಾಂಜನೇಯ ದೇವಾಲಯದ ಮುಂಭಾಗದಲ್ಲಿ ಶ್ರೀ ವೀರಾಂಜನೇಯಸ್ವಾಮಿ ಬಲಿಜ ಸೇವಾ ಟ್ರಸ್ಟ್ ವತಿಯಿಂದ 96 ನೇ ವರ್ಷದ ಉಟ್ಲು ಪರಿಷೆ ವಿಶೇಷವಾಗಿ ಜನಾಕರ್ಷಣೆಗೆ ಪಾತ್ರವಾಗಿತ್ತು. ಹಾಲನ್ನು ಮಡಿಕೆಯಲ್ಲಿ ಕಟ್ಟಿ ಪೂಜಿಸಿ ಒಡೆಯುತ್ತಾರೆ. ನಂತರ ನಡೆಯುವ ಮನರಂಜನಾ ಉಟ್ಲು ಜನಾಕರ್ಷಣೆಯ ಕೇಂದ್ರ ಬಿಂದು. ಎತ್ತರದ ಕಂಬದ ಮೇಲೆ ಕಬ್ಬಿಣದಲ್ಲಿ ಮಾಡಿರುವ ತಿರುಗುಮಣೆ ಇರುತ್ತದೆ. ಅದಕ್ಕೆ ನಾಲ್ಕು ಹಗ್ಗಗಳನ್ನು ಕಟ್ಟಿರುತ್ತಾರೆ. ಹಗ್ಗದ ತುದಿಯಲ್ಲಿ ತೆಂಗಿನಕಾಯಿ ಕಟ್ಟಿರುತ್ತಾರೆ. ತಿರುಗುಮಣೆಯಲ್ಲಿ ಇಬ್ಬರು ಕುಳಿತು ತಿರುಗಿಸುತ್ತಿದ್ದಂತೆಯೇ ತೆಂಗಿನಕಾಯಿ ಕಟ್ಟಿರುವ ಹಗ್ಗವೂ ಸುತ್ತತೊಡಗುತ್ತವೆ. ಉದ್ದುದ್ದ ಕೋಲು ಹಿಡಿದು ಈ ಕೆಲವರು ತೆಂಗಿನಕಾಯಿಯನ್ನು ಹೊಡೆಯಲು ನಿಂತಿರುತ್ತಾರೆ. ಅವರು ತೆಂಗಿನಕಾಯಿಗೆ ಹೊಡೆಯದಂತೆ ಅವರೆಡೆಗೆ ಸುತ್ತಲಿಂದ ನೀರನ್ನು ಎರಚುತ್ತಿರುತ್ತಾರೆ. ಈ ಆಟ ನೋಡುವ ಜನ ಹೊಡೆಯಲು ಕೂಗುತ್ತಾ ಹುರಿದುಂಬಿಸುತ್ತಾರೆ. ತೆಂಗಿನ ಕಾಯಿ ಹೊಡೆದವರಿಗೆ ಹಾರಹಾಕಿ ದೇವಾಲಯದಲ್ಲಿ ಸನ್ಮಾನಿಸಿದರು.