Sidlaghatta, Chikkaballapur : ಈ ದಿನ ಶಿಡ್ಲಘಟ್ಟದಲ್ಲಿ ನಡೆದ ಓಟ್ ಚೋರ್ ಗದ್ದಿ ಛೋಡ್ ಕಾರ್ಯಕ್ರಮದಲ್ಲಿ ಪಕ್ಷದ ಶಿಷ್ಟಾಚಾರವನ್ನು ಉಲ್ಲಂಘಿಸಲಾಗಿದೆ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ ಎಂದು ಐ.ಎನ್.ಟಿ.ಯು.ಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಅವರು ಸೋಮವಾರ ಶಿಡ್ಲಘಟ್ಟ ನಗರದಲ್ಲಿ ಓಟ್ ಚೋರ್ ಗದ್ದಿ ಛೋಡ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅದಕ್ಕೆ ಪಕ್ಷದ ಬೆಂಬಲವಿಲ್ಲ. ಪಕ್ಷದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಇತರೆ ಪದಾಧಿಕಾರಿಗಳ ಗಮನಕ್ಕೆ ತರದೇ ಕಾರ್ಯಕ್ರಮ ನಡೆಸಿದ್ದಾರೆ ಎಂದು ಆರೋಪಿಸಿದರು.
ಜತೆಗೆ ಶಿಡ್ಲಘಟ್ಟ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಗಿದ್ದ ಮತ್ತು ಪಕ್ಷವನ್ನು ಕಟ್ಟಿ ಬೆಳೆಸಿದ ಮಾಜಿ ಸಚಿವ ವಿ.ಮುನಿಯಪ್ಪ ಅವರನ್ನು ಬಳಸಿಕೊಂಡು ಅವರನ್ನು ಮುಂದಿಟ್ಟುಕೊಂಡು ಪಕ್ಷದ ಮೇಲೆ ಹಿಡಿತ ಸಾಧಿಸಲು ಕೆಲವರು ಹುನ್ನಾರ ನಡೆಸಿದ್ದು ಅದು ಎಂದಿಗೂ ಸಾಧ್ಯವಿಲ್ಲ ಎಂದು ಪುಟ್ಟು ಆಂಜಿನಪ್ಪ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷದಿಂದ ಯಾವುದೇ ಕಾರ್ಯಕ್ರಮ, ಪ್ರತಿಭಟನೆ, ಸಂಘಟನೆ ಮಾಡಬೇಕಾದರೆ ಪಕ್ಷದ ನೀತಿ ನಿಯಮಗಳನ್ನ ಪಾಲಿಸಬೇಕು, ಬ್ಲಾಕ್ ಕಾಂಗ್ರೆಸ್ ಹಾಗೂ ವಿವಿಧ ಮುಂಚೂಣಿ ಘಟಕಗಳನ್ನು ವಿಶ್ವಾಶಕ್ಕೆ ತೆಗೆದುಕೊಂಡು ಕಾರ್ಯಕ್ರಮ ರೂಪಿಸಬೇಕು.
ಆದರೆ ಪುಟ್ಟು ಆಂಜಿನಪ್ಪ ಅವರು ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಮ್ಮ ಕೆಲ ಬೆಂಬಲಿಗರನ್ನು ಹಿಂದೆ ಇಟ್ಟುಕೊಂಡು ಓಟ್ ಚೋರ್ ಗದ್ದಿ ಛೋಡ್ ಮಾಡಿದ್ದು ಇದು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಲಿದೆ.
ಇದೇ ತಿಂಗಳ 16ನೇ ತಾರೀಖು ಅಧಿಕೃತವಾಗಿ ಪಕ್ಷದಿಂದ ಓಟ್ ಚೋರ್ ಗದ್ದಿ ಛೋಡ್ ಕಾರ್ಯಕ್ರಮವನ್ನು ರೂಪಿಸಲಿದ್ದು ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ವಿವಿಧ ಘಟಕಗಳ ಪದಾಧಿಕಾರಿಗಳು, ಜಿಲ್ಲಾ ಮತ್ತು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
For Daily Updates WhatsApp ‘HI’ to 7406303366
