Sidlaghatta : “ತಂದೆ-ತಾಯಿ ಸಂತುಷ್ಟರಾದರೆ ಪರಮೇಶ್ವರನೂ ಪ್ರಸನ್ನನಾಗುತ್ತಾನೆ. ಹೆತ್ತವರ ಹಾದಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಕೃತಜ್ಞತೆ,” ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖೆಯ ಶ್ರೀ ಮಂಗಳನಾಥಸ್ವಾಮೀಜಿ ತಿಳಿಸಿದರು.
ನಗರದ ಹನುಮಂತಪುರ ಗೇಟ್ನಲ್ಲಿರುವ ಬಿ.ಜಿ.ಎಸ್ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಮಾತಾ ಪಿತೃ ವಂದನಾ’ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ದೊಡ್ಡದು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸುವುದೇ ನಮ್ಮ ಸಂಸ್ಥೆಯ ಮೂಲ ಉದ್ದೇಶ ಎಂದರು.
ನಗರಸಭೆ ಪೌರಾಯುಕ್ತೆ ಜಿ. ಅಮೃತ ಮಾತನಾಡಿ, “ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಅಥವಾ ಇತರೆ ಆಕರ್ಷಣೆಗಳಿಗೆ ಒಳಗಾಗದೆ ಓದಿನ ಮೇಲೆ ಮಾತ್ರ ಗಮನ ಹರಿಸಬೇಕು. ಶಿಕ್ಷಣವೊಂದೇ ಉನ್ನತ ಸ್ಥಾನ ತಂದುಕೊಡಬಲ್ಲದು,” ಎಂದು ಸಲಹೆ ನೀಡಿದರು.
ಆಡಳಿತಾಧಿಕಾರಿ ಡಾ. ಎನ್. ಶಿವರಾಮರೆಡ್ಡಿ ಮಾತನಾಡಿ, ಹದಿಹರೆಯದ ಚಂಚಲ ಮನಸ್ಸನ್ನು ನಿಯಂತ್ರಿಸಲು ಪೋಷಕರು ಮತ್ತು ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ. ಎಸೆಸೆಲ್ಸಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವಂತೆ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು.
ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳು ತಮ್ಮ ಪೋಷಕರ ಪಾದ ಪೂಜೆ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಅನೇಕ ಪೋಷಕರು ಮತ್ತು ವಿದ್ಯಾರ್ಥಿಗಳು ಭಾವುಕರಾದರು. ಪ್ರಿನ್ಸಿಪಾಲ್ ಕೆ. ಮಹದೇವ್ ಮತ್ತಿತರರು ಹಾಜರಿದ್ದರು.








