Sugaturu, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಘ ಸೇವಾ ಟ್ರಸ್ಟ್ ಹಾಗೂ ಬಂಗಲೆ ಕುಟುಂಬದ ಜಂಟಿ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಶರಣಸಾಹಿತ್ಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶರಣಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಚಂದ್ರಶೇಖರ ಹಡಪದ್ ಅವರು, ಇಂದಿನ ಆಧುನಿಕ ಜಗತ್ತಿನಲ್ಲಿ ಯುವಪೀಳಿಗೆಯು ಕೇವಲ ಅಂಕಗಳಿಕೆಯ ಶಿಕ್ಷಣಕ್ಕೆ ಸೀಮಿತವಾಗದೆ, ಮಾನವೀಯ ಮೌಲ್ಯಗಳನ್ನು ಕಲಿಯುವುದು ಅತ್ಯಗತ್ಯವಾಗಿದೆ. ಶರಣರು ನುಡಿದಂತೆ ನಡೆದವರು. ಅವರ ಬದುಕು ನಮಗೆ ದಾರಿದೀಪವಾಗಬೇಕು. ವಿದ್ಯಾರ್ಥಿಗಳು ತಂದೆ-ತಾಯಿ, ಗುರು ಹಿರಿಯರಿಗೆ ಗೌರವ ನೀಡುವುದರ ಜೊತೆಗೆ, ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ವಚನಸಾಹಿತ್ಯದಲ್ಲಿನ ನೈತಿಕ ಮೌಲ್ಯಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ ಅವರು ಮಾತನಾಡಿ, ವಚನಸಾಹಿತ್ಯವು ಕೇವಲ ಒಂದು ಕಾಲಘಟ್ಟಕ್ಕೆ ಸೀಮಿತವಾದ ಸಾಹಿತ್ಯವಾಗಿರದೇ ಸಾರ್ವಕಾಲಿಕ ಜೀವನ ಧರ್ಮವಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ವಚನಗಳ ಓದು ಮತ್ತು ಶರಣರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದರು.
ದೇವನಹಳ್ಳಿ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್ಬಾಬು ಅವರು ಮಾತನಾಡಿ, ಇಂದಿನ ಯುವಪೀಳಿಗೆಯು ತಂತ್ರಜ್ಞಾನದ ಸುಳಿಗೆ ಸಿಲುಕಿ ನಮ್ಮ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಬೇರುಗಳಿಂದ ದೂರವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.
ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ವಚನಗಾಯನ ನಡೆಸಿ ಪುಸ್ತಕ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಪದ್ಮಶ್ರೀ, ಶಿಕ್ಷಕ ಎ.ಬಿ.ನಾಗರಾಜ, ಟಿ.ಎಂ.ಮಧು, ಎಸ್.ಡಿ.ಎಂ.ಸಿ ಮಾಜಿ ಸದಸ್ಯ ಬಚ್ಚೇಗೌಡ ಹಾಜರಿದ್ದರು.








