
Sidlaghatta : ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಸಾರ್ವಜನಿಕರು, ವ್ಯಾಪಾರಸ್ಥರು ಹಾಗೂ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗಿದ್ದ ನಗರದ ಪ್ರಮುಖ ವಾಸವಿ ರಸ್ತೆಗೆ ಕೊನೆಗೂ ಕಾಂಕ್ರೀಟ್ ರಸ್ತೆ ಭಾಗ್ಯ ದೊರೆತಿದೆ. ಗುರುವಾರ ರಾತ್ರಿ ಶಾಸಕ ಬಿ.ಎನ್. ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ನಡೆಯುತ್ತಿರುವ ಕಾಂಕ್ರೀಟೀಕರಣ ಕಾಮಗಾರಿಯನ್ನು ಪರಿಶೀಲಿಸಿದರು.
In English: Sidlaghatta’s Vasavi Road, a key commercial stretch that had suffered years of neglect due to drainage and pipeline works, is finally getting a concrete surface. MLA B N Ravikumar inspected the ₹1 crore concreting work on Thursday night and directed officials to maintain quality and finish remaining works without delay.
ನಗರದ ಪ್ರಮುಖ ವಾಣಿಜ್ಯ ಪ್ರದೇಶವಾಗಿರುವ ವಾಸವಿ ರಸ್ತೆ ಸಂತೆ, ಬಸ್ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ನಗರದ ವಿವಿಧ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದೆ. ವಾಸವಿ ರಸ್ತೆ–ಅಶೋಕ ರಸ್ತೆ ಸಂಪರ್ಕಕ್ಕೂ ಈ ಮಾರ್ಗ ಪ್ರಮುಖವಾಗಿದ್ದು, ರಸ್ತೆ ಕಿರಿದಾಗಿರುವುದು ಮತ್ತು ಹದಗೆಟ್ಟ ಸ್ಥಿತಿಯಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದರು.
ಈ ಹಿಂದೆ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡು ಚರಂಡಿ, ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ಹಾಗೂ ವಿವಿಧ ಪೈಪ್ಲೈನ್ ಕಾಮಗಾರಿಗಳಿಂದ ರಸ್ತೆ ಅಗೆದ ಸ್ಥಿತಿಯಲ್ಲೇ ಹಲವು ತಿಂಗಳು ಉಳಿದಿತ್ತು. ಇದರಿಂದ ವ್ಯಾಪಾರ-ವಹಿವಾಟಿಗೆ ತೀವ್ರ ಹೊಡೆತ ಬಿದ್ದಿದ್ದರೆ, ಸ್ಥಳೀಯ ನಿವಾಸಿಗಳು ಕುಡಿಯುವ ನೀರು ಹಾಗೂ ಸಂಚಾರ ಸಮಸ್ಯೆ ಎದುರಿಸಿದ್ದರು. ಕಾಮಗಾರಿ ವಿಳಂಬದ ಬಗ್ಗೆ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇದೀಗ ರಸ್ತೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲಾಗಿದೆ.
ಗುರುವಾರ ರಾತ್ರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರವಿಕುಮಾರ್, ಸುಮಾರು “₹1 ಕೋಟಿ ವೆಚ್ಚದಲ್ಲಿ” ನಿರ್ಮಿಸಲಾಗುತ್ತಿರುವ ಗುಣಮಟ್ಟದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು. ರಸ್ತೆ ನಿರ್ಮಾಣದ ವೇಳೆ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಹಾಗೂ ಉಳಿದ ಕಾಮಗಾರಿಗಳನ್ನೂ ಸಮನ್ವಯದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ವಾಸವಿ ರಸ್ತೆಯ ಸಮಸ್ಯೆಯನ್ನು ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ನಿರಂತರವಾಗಿ ಗಮನಕ್ಕೆ ತಂದಿದ್ದರು. ಹಲವು ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಕಾರಣ ರಸ್ತೆ ನಿರ್ಮಾಣಕ್ಕೆ ಸ್ವಲ್ಪ ಸಮಯ ಬೇಕಾಯಿತು. ಈಗ ಎಲ್ಲರ ಸಹಕಾರದೊಂದಿಗೆ ಗುಣಮಟ್ಟದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.
ಸ್ಥಳೀಯ ವರ್ತಕರು, ನಾಗರಿಕರು ಹಾಗೂ ಗುತ್ತಿಗೆದಾರರು ಕಾಮಗಾರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವುದರ ಜತೆಗೆ ವಾಣಿಜ್ಯ ಚಟುವಟಿಕೆಗೂ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.
ನಗರಕ್ಕೆ ಹಲವು ಅಭಿವೃದ್ಧಿ ಯೋಜನೆ
ಶಿಡ್ಲಘಟ್ಟ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ರಾಮಸಮುದ್ರ ಕೆರೆಯಿಂದ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆ ಜಾರಿಯಲ್ಲಿದ್ದು, ಅಮೃತ್–2 ಯೋಜನೆಯಡಿ ಸುಮಾರು ₹93 ಕೋಟಿ ವೆಚ್ಚದಲ್ಲಿ ಪ್ರತಿ ಮನೆಗೂ ಕುಡಿಯುವ ನೀರು ತಲುಪಿಸುವ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು.
ನಗರದ ಮುಂದಿನ ಸುಮಾರು 40 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸುಮಾರು ₹70 ಕೋಟಿ ವೆಚ್ಚದಲ್ಲಿ ಒಳಚರಂಡಿ (ಯುಜಿಡಿ) ಕಾಮಗಾರಿಯನ್ನೂ ಕೈಗೆತ್ತಿಕೊಳ್ಳಲಾಗಿದೆ. ಈ ಎಲ್ಲ ಕಾಮಗಾರಿಗಳು ಪೂರ್ಣಗೊಂಡ ಬಳಿಕ ನಗರದ ಕುಡಿಯುವ ನೀರು, ಒಳಚರಂಡಿ ಹಾಗೂ ರಸ್ತೆ ಮೂಲಸೌಕರ್ಯದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಧಿವೇಶನದಲ್ಲಿ ಕ್ಷೇತ್ರದ ಸಮಸ್ಯೆಗಳ ಚರ್ಚೆಗೆ ಅವಕಾಶವಾಗಲಿಲ್ಲ
ವಿಧಾನಸಭೆಯ ಇತ್ತೀಚಿನ ಎಂಟು ದಿನಗಳ ಅಧಿವೇಶನದಲ್ಲಿ ವಾಲ್ಮೀಕಿ ನಿಗಮದ ಹಗರಣದ ವಿಚಾರವೇ ಪ್ರಮುಖವಾಗಿ ಚರ್ಚೆಗೆ ಗ್ರಾಸವಾಯಿತು. ಇದರಿಂದ ವಿರೋಧ ಪಕ್ಷದ ಶಾಸಕರಿಗೆ ತಮ್ಮ ಕ್ಷೇತ್ರಗಳ ಸಮಸ್ಯೆಗಳು ಹಾಗೂ ಜನರ ಮೂಲಸೌಕರ್ಯ ಸಂಬಂಧಿತ ವಿಚಾರಗಳನ್ನು ಸಮರ್ಪಕವಾಗಿ ಪ್ರಸ್ತಾಪಿಸಲು ಅವಕಾಶ ದೊರೆಯಲಿಲ್ಲ ಎಂದು ಶಾಸಕ ರವಿಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಬರ ಪರಿಸ್ಥಿತಿ ಹಾಗೂ ಜನರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳ ಕುರಿತು ಚರ್ಚೆ ನಡೆಯಬೇಕಿತ್ತು. ಮುಂದಿನ ದಿನಗಳಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಯ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.