Sidlaghatta : ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹು ಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಯಮನಪ್ಪ ಕರೆಹನುಮಂತಪ್ಪ ತಿಳಿಸಿದರು.
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನುಷ್ಯನ ದೇಹಕ್ಕೆ ಹೇಗೆ ಜ್ವರ ನೆಗಡಿ ಇನ್ನಿತರೆ ಬಾಧೆಗಳು ಕಾಡಿಸುತ್ತವೆ. ಅದೇ ರೀತಿ ಮನುಷ್ಯನ ಮೆದುಳು ಕೂಡ ಅನಾರೋಗ್ಯಕ್ಕೆ ತುತ್ತಾಗುತ್ತದೆ. ಇದನ್ನು ನಿರ್ಲಕ್ಷ್ಯಿಸಿದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ. ಎಚ್ಚರ ವಹಿಸಿ ಚಿಕಿತ್ಸೆ ಪಡೆದು ಗುಣಪಡಿಸಿಕೊಳ್ಳಬೇಕು. ಹಿಂದೆ ಮಾನಸಿಕ ಆರೋಗ್ಯಕ್ಕೆ ಹೆಚ್ಚು ಗಮನ ಹರಿಸುತ್ತಿರಲ್ಲಿಲ್ಲ. ಮೂಢನಂಬಿಕೆಯಿಂದ ಪೂಜೆ, ಹೋಮಗಳ ಮೊರೆ ಹೋಗುತ್ತಿದ್ದರು. ಯಾವುದೇ ವ್ಯಕ್ತಿ ಶೇ ನೂರರಷ್ಟು ಮಾನಸಿಕ ಆರೋಗ್ಯ ಹೊಂದಿರುವುದಿಲ್ಲ. ಆದ್ದರಿಂದ ತಪಾಸಣೆ ಅಗತ್ಯ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಜೆ.ಪೂಜಾ ಮಾತನಾಡಿ, ಹಿರಿಯ ನಾಗರಿಕರನ್ನು ಗೌರವಿಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ. ಮಕ್ಕಳು ತಂದೆ ತಾಯಿಗಳನ್ನು ಗೌರವಾದರ ಗಳಿಂದ ಕಾಣಬೇಕು. ಹಿರಿಯ ನಾಗರಿಕರಿಗೆ ಅನ್ಯಾಯವಾದಾಗ, ಅವರಿಗಾಗಿ ಕಾನೂನು ಗಳಿವೆ. ಅವುಗಳ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.