Sidlaghatta : ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ದೇವಸ್ಥಾನದ ಅಲಂಕಾರಕ್ಕಾಗಿ ಲೈಟಿಂಗ್ ವ್ಯವಸ್ಥೆ ಮಾಡುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
In English: Two young men died of electrocution while setting up Janmashtami decoration lighting at a temple in Y.Hunasenahalli village on Friday night, when a lighting wire reportedly fell on a generator they were trying to move.
ವೈ.ಹುಣಸೇನಹಳ್ಳಿ ಗ್ರಾಮದ ಚೇತನ್ (27) ಮತ್ತು ಸಂತೋಷ್ (35) ಮೃತಪಟ್ಟವರು.
ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜನ್ಮಾಷ್ಟಮಿ ಅಂಗವಾಗಿ ಲೈಟಿಂಗ್ ಹಾಗೂ ಅಲಂಕಾರದ ಕೆಲಸ ನಡೆಯುತ್ತಿತ್ತು. ಸೀರಿಯಲ್ ಸೆಟ್ ಗಳ ವೈರ್ ಗಳನ್ನು ಅಳವಡಿಸುತ್ತಿದ್ದ ಸಂದರ್ಭದಲ್ಲಿ ಲೈಟಿಂಗ್ ಗೆ ಬಳಸುತ್ತಿದ್ದ ವೈರ್ ಒಂದು ಜನರೇಟರ್ ಮೇಲೆ ಬಿದ್ದಿದೆ ಎನ್ನಲಾಗಿದೆ. ಇದರಿಂದ ಜನರೇಟರ್ ನಲ್ಲಿ ವಿದ್ಯುತ್ ಪ್ರವಹಿಸಿದೆ.
ಈ ವೇಳೆ ಜನರೇಟರ್ನ್ನು ದೇವಸ್ಥಾನದ ಒಳಭಾಗಕ್ಕೆ ಸ್ಥಳಾಂತರಿಸುತ್ತಿದ್ದ ಚೇತನ್ ಮತ್ತು ಸಂತೋಷ್ ವಿದ್ಯುತ್ ಪ್ರವಾಹಕ್ಕೆ ಸಿಲುಕಿದ್ದಾರೆ. ತೀವ್ರ ವಿದ್ಯುತ್ ಶಾಕ್ ನಿಂದ ಇಬ್ಬರೂ ಸ್ಥಳದಲ್ಲೇ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಸಂತೋಷ್ ಅವರು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಭಿಮಾನಿಯಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯುತ್ ಅವಘಡಕ್ಕೆ ನಿಖರ ಕಾರಣ ಹಾಗೂ ಲೈಟಿಂಗ್ ವ್ಯವಸ್ಥೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಜನ್ಮಾಷ್ಟಮಿ ಸಂಭ್ರಮದ ಸಿದ್ಧತೆಯಲ್ಲಿದ್ದ ವೇಳೆ ಸಂಭವಿಸಿದ ದುರಂತದಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

