30.4 C
Sidlaghatta
Saturday, February 28, 2026

ಕರಗದಮ್ಮದೇವಿ ಹೂವಿನ ಕರಗ ಮಹೋತ್ಸವ

- Advertisement -
- Advertisement -

ನಗರದ ಮುತ್ತೂರು ಬೀದಿಯಲ್ಲಿರುವ ಕರಗದಮ್ಮದೇವಿ ಹೂವಿನ ಕರಗ ಮಹೋತ್ಸವವು ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು.
ಕರಗದ ಪ್ರಯುಕ್ತ ಹೂವಿನ ವೃತ್ತ ಮತ್ತು ಮುತ್ತೂರು ಬೀದಿಯಲ್ಲಿ ವಾದ್ಯಗೋಷ್ಠಿ ಆಯೋಜಿಸಲಾಗಿತ್ತು. ಮುಳಬಾಗಿಲ ವೆಂಕಟೇಶ್ ರಾತ್ರಿಯಿಡೀ ಕರಗವನ್ನು ಹೊತ್ತು ನಾಡೋಜ ಮುನಿವೆಂಕಟಪ್ಪನವರ ತಮಟೆಯ ವಾದನ ತಂಡದೊಂದಿಗೆ ಊರೆಲ್ಲಾ ಸುತ್ತಿದಾಗ ದಾರಿಯುದ್ದಕ್ಕೂ ಮಲ್ಲಿಗೆ ಹೂಗಳನ್ನು ಅರ್ಪಿಸಿ, ಆರತಿ ಬೆಳಗುತ್ತಿದ್ದರು. ಕೆಲವೆಡೆ ಕರಗದ ಆಗಮನಕ್ಕಾಗಿ ರಸ್ತೆಯ ಮೇಲೆಲ್ಲಾ ರಂಗೋಲಿಯನ್ನು ಬಿಡಿಸಲಾಗಿತ್ತು. ರಸ್ತೆಯನ್ನು ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ಶಿರದ ಮೇಲೆ ಕಳಶ ಹೊತ್ತು ಕುಣಿಯುವ ಈ ಕಲೆ ಪ್ರಾಚೀನವಾದದ್ದು. ಕರಗದಾಚರಣೆ ಎಂದರೆ ಆದಿಶಕ್ತಿಯ ಆಚರಣೆ ಎಂದು ನಂಬಲಾಗಿದ್ದು ಆಕೆಯನ್ನು ಕರಗದಮ್ಮ ಎಂದೂ ಕರೆಯಲಾಗುತ್ತದೆ. ತಮಿಳುನಾಡಿನಿಂದ ೧೪ನೆಯ ಶತಮಾನದಲ್ಲಿ ನಂದಿದುರ್ಗದಲ್ಲಿ ಬಂದ ನೆಲೆಸಿದ ರಣಭೈರೇಗೌಡರ ಮೂಲಕ ಈ ಕರಗದ ಕಲೆ ನಮ್ಮ ನಾಡಿಗೆ ಬಂತೆಂದು ನಂಬಲಾಗಿದೆ.
ಮಣ್ಣಿನ ಮಡಿಕೆಗೆ ಜಲ ತುಂಬಿಸಲಾಗುತ್ತದೆ. ಆಮೇಲೆ ಅದಕ್ಕೆ ಅರಿಶಿನ, ಕುಂಕುಮ ಹೂಗಳಿಂದ ಅಲಂಕರಿಸಿ ಅದರ ಮೇಲೆ ಗೋಪುರದಂತೆ ಮಲ್ಲಿಗೆ ಹೂವಿನ ಹಾರಗಳನ್ನು ಇಳಿಬಿಡಲಾಗುತ್ತದೆ. ಇದುವೇ ಕರಗ.
ವೀರಕುಮಾರರು ಅಲಗು ಸೇವೆ ಮಾಡಿದರು. ಹಲಗೆ, ತಮಟೆ ವಾದ್ಯಗಳೊಂದಿಗೆ ಕರಗ ದೇವಾಲಯದ ಪ್ರದಕ್ಷಿಣೆ ಮಾಡಿ ನರ್ತಿಸಿತು. ಮುಂದೆ ಕತ್ತಿ ಹಿಡಿದ ವೀರಕುಮಾರರು, ಹಿಂದೆ ಕುಣಿಯುತ್ತಾ ಕರಗ ರಾತ್ರಿಯಿಡೀ ಊರೆಲ್ಲಾ ಸಂಚರಿಸಿತು. ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ರಂಗೋಲಿ ಹಾಕಿ ಅಲ್ಲಿಗೆ ಕರಗ ಬರುತ್ತಿದ್ದಂತೆ ಭಕ್ತಿಯಿಂದ ಆರತಿ ಬೆಳಗಿ ಮಲ್ಲಿಗೆ ಹೂಗಳನ್ನು ಸಮರ್ಪಿಸಿದರು. ಊರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಶನಿವಾರ ಒನಕೆ ಕರಗ ಮತ್ತು ಅಗ್ನಿಕುಂಡವನ್ನು ದೇವಸ್ಥಾನದ ಬಳಿ ನಡೆಸಲಾಯಿತು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!