ಸಹಕಾರ ಸಂಘಗಳು ಗ್ರಾಮೀಣ ಪ್ರದೇಶಗಳ ಜನರ ಆರ್ಥಿಕ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಿದ್ದು ಅವುಗಳ ಬೆಳವಣಿಗೆಗಾಗಿ ಎಲ್ಲರೂ ಶ್ರಮಿಸಬೇಕು ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ ಹೇಳಿದರು.
ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂತಡಿಪಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ತೀವ್ರ ಬರಗಾಲಕ್ಕೆ ತುತ್ತಾಗಿರುವ ಬಯಲುಸೀಮೆಯ ಜಿಲ್ಲೆಗಳಲ್ಲಿನ ಜನರು ತಮ್ಮ ಜೀವನ ಮಟ್ಟ ಸುಧಾರಣೆಗಾಗಿ ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ಉತ್ಪಾದಕರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವ ಮೂಲಕ ಸಹಕಾರಿ ಸಂಘಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಶ್ರಮಿಸಬೇಕು ಎಂದರು.
ಹಾಲು ಒಕ್ಕೂಟವು ಕೂಡಾ ಉತ್ಪಾದಕರಿಗೆ ಅನುಕೂಲವಾಗುವಂತೆ ಈಗಾಗಲೇ ಅನೇಕ ನೂತನ ಯೋಜನೆಗಳನ್ನು ಜಾರಿಗೆ ತಂದಿದ್ದು ಎಷ್ಟೇ ಹಾಲು ಉತ್ಪಾದನೆಯಾದರೂ ಕೂಡಾ ಮಾರುಕಟ್ಟೆಯ ಕೊರತೆಯಿಲ್ಲದಂತೆ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಿದೆ ಎಂದರು.
ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಎಂ.ರಾಜಣ್ಣ ಮಾತನಾಡಿ, ಸಹಕಾರಿ ಸಂಘಗಳು ಜನರ ಸಹಕಾರಕ್ಕೆ ಮಾತ್ರ ಸೀಮಿತವಾಗಬೇಕು. ಯಾವುದೇ ಕಾರಣಕ್ಕೂ ಸಹಕಾರ ಸಂಘಗಳಲ್ಲಿ ರಾಜಕೀಯ ಮಾಡದೇ ಗ್ರಾಮದ ಸಹಕಾರಿ ಸಂಘದ ಏಳಿಗೆಗಾಗಿ ಎಲ್ಲರೂ ಶ್ರಮಿಸಬೇಕು ಎಂದರು.
ಸಹಕಾರಿ ಸಂಘಗಳ ಮೂಲಕ ಜನರಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಉತ್ಪಾದಕರಿಗೆ ತಲುಪಿಸುವಂತಹ ಕೆಲಸವನ್ನು ಗ್ರಾಮದ ಮುಖಂಡರೂ ಸೇರಿದಂತೆ ಸಹಕಾರಿ ಸಂಘದ ನಿರ್ದೇಶಕರು ಹಾಗು ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಚಿಂತಡಿಪಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಿ.ಎಂ.ಮಾರೇಗೌಡ, ಮಾಜಿ ಅಧ್ಯಕ್ಷರಾದ ಪಿ.ನರಸಿಂಹಯ್ಯ, ಎಂ.ಮುನಿನಾರಾಯಣಪ್ಪ, ಕೋಚಿಮುಲ್ ಶಿಡ್ಲಘಟ್ಟ ಶಿಭಿರ ಘಟಕದ ಉಪವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್, ವಿಸ್ತರಣಾಧಿಕಾರಿ ಎಂ.ಬಿ.ಮಂಜುನಾಥ್, ಮಾರುತಿ, ನಾರಾಯಣಸ್ವಾಮಿ, ರಮೇಶ್, ಮುನಿರಾಜು, ಮುರಳಿ, ದೇವರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -