ತಾಲ್ಲೂಕಿನ ವೈ ಹುಣಸೇನಹಳ್ಳಿ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘದ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮಹಿಳಾ ಸ್ವ ಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ವಿತರಣೆ ಸಮಾರಂಭದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿದರು.
ರೈತರು ಹಾಗೂ ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳು ಸಹಕಾರಿ ಬ್ಯಾಂಕುಗಳಲ್ಲಿ ಪಡೆಯುವಂತಹ ಸಾಲಗಳನ್ನು ಸಕಾರಣಕ್ಕೆ ಬಳಸಿಕೊಂಡು ಆರ್ಥಿಕವಾಗಿ ಮುಂದುವರೆಯುವ ಜೊತೆಗೆ ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವ ಮೂಲಕ ಬ್ಯಾಂಕುಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಪ್ರತಿಯೊಬ್ಬ ರೈತರು ಡಿಸಿಸಿ ಬ್ಯಾಂಕ್ನಲ್ಲಿ ಖಾತೆ ತೆರೆದು ಹಣ ಠೇವಣಿ ಇಡುವ ಮೂಲಕ ವ್ಯವಹರಿಸಿದಾಗ ಡಿಸಿಸಿ ಬ್ಯಾಂಕ್ ನಿಂದ ಮತ್ತಷ್ಟು ಜನರಿಗೆ ಸಾಲ ನೀಡಲು ಸಹಕಾರಿಯಾಗುತ್ತದೆ. ಸಹಕಾರ ಸಂಘದಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಬೆರಸದೇ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ಎಲ್ಲಾ ರೈತರಿಗೂ ಸಾಲ ವಿತರಣೆ ಮಾಡುವ ಬದ್ದತೆ ನಿರ್ದೇಶಕರೂ ಹಾಗೂ ಸಿಬ್ಬಂದಿ ಬೆಳೆಸಿಕೊಳ್ಳಬೇಕು ಎಂದರು.
ಶಾಸಕ ವಿ.ಮುನಿಯಪ್ಪ ಮಾತನಾಡಿ, ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ರಾಷ್ಟ್ರೀಕೃತ ಬ್ಯಾಂಕುಗಳು ಸೇರಿ ಸುಮಾರು ೭೪ ಸಾವಿರ ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಿದ್ದರ ಪರಿಣಾಮ ದಿವಾಳಿಯಾಗಿದ್ದ ಸಹಕಾರಿ ಬ್ಯಾಂಕುಗಳು ಚೇತರಿಸಿಕೊಂಡು ಕೋಟ್ಯಾಂತರ ರೂಪಾಯಿಗಳ ವಹಿವಾಟು ನಡೆಸುವಂತಾಗಿದೆ. ಸಹಕಾರಿ ಬ್ಯಾಂಕುಗಳ ಏಳಿಗೆಗಾಗಿ ರೈತರು ಮತ್ತು ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರು ಕಾಲ ಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಸಹಕಾರ ನೀಡಬೇಕು ಎಂದರು.
ಮಾಜಿ ಶಾಸಕ ಎಂ.ರಾಜಣ್ಣ ಮಾತನಾಡಿ, ಸಹಕಾರಿ ಸಂಘಗಳ ಮೂಲಕ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವಲ್ಲಿ ಸ್ವಸಹಾಯ ಗುಂಪುಗಳು ರಾಜ್ಯಾದ್ಯಂತ ಹೆಸರು ಮಾಡಿದೆ. ರೈತರು, ಮಹಿಳೆಯರು ತಾವು ಪಡೆದುಕೊಂಡ ಸಾಲಗಳನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡಿ, ಇತರರಿಗೂ ಅನುಕೂಲ ಮಾಡಿಕೊಡಬೇಕು ಎಂದರು.
ಈ ಸಂದರ್ಭದಲ್ಲಿ ೪೩ ಮಹಿಳಾ ಸ್ವಸಹಾಯ ಸಂಘಗಳಿಗೆ ಒಟ್ಟು ೧ ಕೋಟಿ ೨೯ ಲಕ್ಷದ ಸಾಲದ ಚೆಕ್ಗಳನ್ನು ವಿತರಿಸಲಾಯಿತು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಪಂಕಜ ನಿರಂಜನ್, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಬಸವರಾಜ್, ಕೆ.ಗುಡಿಯಪ್ಪ, ಎಸ್.ಎಂ.ನಾರಾಯಣಸ್ವಾಮಿ, ಸುಬ್ರಮಣಿ, ಕ್ಯಾತಪ್ಪ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್ ಹಾಜರಿದ್ದರು.
- Advertisement -
- Advertisement -
- Advertisement -